![](https://kannada.travel/wp-content/uploads/2023/12/IMG-20231223-WA0002-780x470.jpg)
ವಾರಾಂತ್ಯದಲ್ಲಿ ಸಾಲು ಸಾಲು ರಜೆಯಿದೆ. ಶನಿವಾರ, ಭಾನುವಾರದ ರಜೆ ಜೊತೆಗೆ ಸೋಮವಾರ ಕ್ರಿಸ್ಮಸ್ ರಜೆ ಕೂಡ ಇರುವ ಕಾರಣದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಬೇರೆ ಬೇರೆ ಭಾಗದ ಮಂದಿ ಊರಿಗೆ ಹೋಗುವ ಯೋಚನೆ ಮಾಡುತ್ತಿದ್ದಾರೆ.
ಅಂತಹವರಿಗೆ ಕೆ.ಎಸ್.ಅರ್. ಟಿ.ಸಿ (KSRTC) ಗುಡ್ ನ್ಯೂಸ್ ನೀಡಿದ್ದು ಡಿ.22 ರಿಂದ 25 ರ ತನಕ 1000 ಹೆಚ್ಚುವರಿ ಬಸ್ ಓಡಿಸಲು ನಿರ್ಧಾರ ಮಾಡಿದ್ದು ಈಗಾಗಲೇ ಯೋಜನೆ ಕಾರ್ಯ ರೂಪಕ್ಕೆ ಬಂದಿದೆ.
![](https://kannada.travel/wp-content/uploads/2023/12/ksrtcbus-1668573381.jpg)
ಡಿಸೆಂಬರ್ 22 ,23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್ಗಳ ಜತೆಗೆ ಈ 1,000 ವಿಶೇಷ ಬಸ್ಗಳ (1000 Special Buses) ಲಭ್ಯವಿರಲಿದ್ದು, ಪ್ರಯಾಣಿಕರು ಯಾವುದೇ ಜನ ದಟ್ಟಣೆ ಇಲ್ಲದೇ ಅರಾಮಾವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಇನ್ನು ಕ್ರಿಸ್ಮಸ್ ರಜೆ (Christmas Holiday) ಮುಗಿದ ಬಳಿಕ ಊರುಗಳಿಂದ ಮತ್ತೆ ಬೆಂಗಳೂರಿಗೆ ವಾಪಸ್ ಆಗುವವರಿಗೆ ಡಿಸೆಂಬರ್ 25 ರಂದು ವಿವಿಧ ಜಿಲ್ಲಾ ಕೇಂದ್ರಗಳಿಂದ ಹಾಗೂ ಹೊರ ರಾಜ್ಯಗಳಿಂದ ವಿಶೇಷ ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಜತೆಗೆ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ.
![](https://kannada.travel/wp-content/uploads/2023/12/ksrtc-1626161551-1650107262.jpg)
ಯಾವ ನಿಲ್ದಾಣಗಳಿಂದ ಯಾವ ಭಾಗಕ್ಕೆ ಬಸ್?
ಕೆಂಪೇಗೌಡ ಬಸ್ ನಿಲ್ದಾಣ -ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ಶಾಂತಿನಗರ, ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
ಮುಂಗಡ ಬುಕ್ಕಿಂಗ್ಗೆ ಶೇ 10 ರಷ್ಟು ರಿಯಾಯಿತಿ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
![](https://kannada.travel/wp-content/uploads/2023/12/prajavani_import_sites_pv_files_article_images_2022_07_26_ksrtc-dh-15669272041658801376.jpg)
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಟಿಕೆಟ್ ಬುಕ್ಕಿಂಗ್ ಎಲ್ಲಿ?
ಇ-ಟಿಕೇಟ್ ಬುಕಿಂಗ್ನ್ನು (E-Ticket Booking) ಕೆಎಸ್ಆರ್ಟಿಸಿ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.
ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.